ಉಳ್ಳಾಲ: ರಿಕ್ಷಾ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬಜಾಲು ನಿವಾಸಿ ರಹಿಮಾನ್ (27) ಎಂಬವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಕಲ್ಲಾಪು ಬಳಿ ಶನಿವಾರ ತಡರಾತ್ರಿ ವೇಳೆ ಸಂಭವಿಸಿದೆ.
ಮಂಗಳೂರಿನಿಂದ ಪ್ರಯಾಣಿಕರನ್ನು ಹೇರಿಕೊಂಡು ತೊಕ್ಕೊಟ್ಟು ಕಡೆಗೆ ಬರುತ್ತಿದ್ದ ರಿಕ್ಷಾ ಕಲ್ಲಾಪು ಸಮೀಪ ಬೈಕಿಗೆ ಡಿಕ್ಕಿ ಹೊಡೆದಿದೆ. ಕೋಟೆಪುರದಲ್ಲಿ ಪತ್ನಿ ಮನೆಗೆ ಹೋಗಿ ಬಜಾಲಿನ ಮನೆಗೆ ಹಿಂತಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಕಲ್ಲಾಪು ಸಮೀಪ ಬೈಕಿನಲ್ಲಿ ಪೆಟ್ರೋಲ್ ಖಾಲಿಯಾದ ಕಾರಣಕ್ಕೆ ರಹಿಮಾನ್ ಅವರು ಬೈಕನ್ನು ದೂಡುತ್ತಾ ರಾ.ಹೆ.ಯ ಬಲಬದಿಯಲ್ಲಿರುವ ಪೆಟ್ರೋಲ್ ಬಂಕಿಗೆ ತೆರಳುತ್ತಿದ್ದರು. ಈ ವೇಳೆ ರಸ್ತೆಯನ್ನು ದಾಟುವ ಸಂದರ್ಭ ರಿಕ್ಷಾ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ರಿಕ್ಷಾ ಚಾಲಕ ಬಶೀರ್ ಹಾಗೂ ಪ್ರಯಾಣಿಕರು ಗಾಯಗೊಂಡಿದ್ದಾರೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಹಿಮಾನ್ ಅವರು ಎರಡು ವರ್ಷಗಳ ಹಿಂದೆಯಷ್ಟೇ ಕೋಟೆಪುರದ ಯುವತಿಯನ್ನು ವಿವಾಹವಾಗಿದ್ದರು
