ಮಂಗಳೂರು : ರಾಷ್ಟ್ರೀಯ ಹೆದ್ದಾರಿಯ 75ರ ಬ್ರಹ್ಮರಕೂಟ್ಲು ಬಳಿಯಿದ್ದ ಟೋಲ್ಗೇಟ್ನ್ನು ಧ್ವಂಸಗೊಳಿಸಿರುವುದು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿಲ್ಲ ಎಂಬುವುದನ್ನು ಎತ್ತಿ ತೋರಿಸುತ್ತಿದೆ. ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳುವ ಪ್ರವೃತ್ತಿ ಹೆಚ್ಚುತ್ತಿದ್ದು, ಇದು ಆತಂಕಕಾರಿ ವಿಷಯವಾಗಿದೆ. ರಾಜ್ಯ ಸರಕಾರ ಜಿಲ್ಲೆಯ ಕಾನೂನು ಸುವ್ಯಸ್ಥೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಒತ್ತಾಯಿಸಿದ್ದಾರೆ.

ಯಾವುದೇ ಸಮಸ್ಯೆಗಳಿದ್ದರೆ ಅದನ್ನು ಕಾನೂನಾತ್ಮಕವಾಗಿ ಇತ್ಯರ್ಥ ಮಾಡಬೇಕೇ ಹೊರತು ಕಾನೂನನ್ನು ಕೈಗೆತ್ತಿಕೊಳ್ಳುವುದು ಸರಿಯಲ್ಲ. ರಾಜಕೀಯ ಲಾಭಕ್ಕಾಗಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ಪ್ರೋತ್ಸಾಹ ನೀಡುವುದರಿಂದ ಇಡೀ ಆಡಳಿತ ವ್ಯವಸ್ಥೆ ಕುಸಿಯಲಿದೆ. ಈ ಹಿನ್ನೆಲೆಯಿಂದ ರಾಜ್ಯ ಸರಕಾರ,ಜಿಲ್ಲಾ ಉಸ್ತುವಾರಿ ಸಚಿವರು ಕಾನೂನು ಬದ್ಧವಾಗಿ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಬೇಕು. ಸುಶಿಕ್ಷಿತರ ಜಿಲ್ಲೆಯಾದ ದಕ್ಷಿಣ ಕನ್ನಡವನ್ನು ಗೂಂಡಾ ರಾಜ್ಯವನ್ನಾಗಿ ಪರಿವತರ್ಿಸಲು ಪ್ರಯತ್ನಿಸುವುದು ಸರಿಯಲ್ಲ. ಪೊಲೀಸರು ಕೂಡ ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗದೆ, ನ್ಯಾಯಪರವಾಗಿ ಕಾರ್ಯನಿರ್ವಹಿಸಬೇಕು. ಹಾಗೂ ಯಾರು ಕಾನೂನು ಕೈಗೆತ್ತಿಕೊಂಡಿದ್ದಾರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.
