ನವದೆಹಲಿ: ದೇಶದ ಜನತೆಯ ಆಶಯ ಫಲಿಸಲಿಲ್ಲ. ಸಿಯಾಚಿನ್ ನಲ್ಲಿ ಸಂಭವಿಸಿದ ಭೀಕರ ಹಿಮಪಾತದಲ್ಲಿ ಸಿಲುಕಿ 6 ದಿನಗಳ ನಂತರ ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿದ್ದ ಯೋಧ ಹನುಮಂತಪ್ಪ ಕೊಪ್ಪದ್ ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ.
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಬೆಟದೂರು ನಿವಾಸಿ ಯೋಧ ಹನುಮಂತಪ್ಪ ಕೊಪ್ಪದ್ ಅವರು ಮೂರು ದಿನಗಳಿಂದ ಕೋಮಾ ಸ್ಥಿತಿಯಲ್ಲಿದ್ದು, ದೆಹಲಿಯ ಆರ್ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅಂಗಾಗ ವೈಫಲ್ಯದಿಂದಾಗಿ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 11.45ರ ಸುಮಾರಿಗೆ ವಿಧಿವಶರಾಗಿದ್ದಾರೆ.
ಥೆರಪಿ ಉತ್ತಮ ಚಿಕಿತ್ಸೆಯ ಬಳಿಕವೂ ಯೋಧನ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಾಣುತ್ತಿಲ್ಲ. ಹನುಮಂತಪ್ಪ ಅವರ ಎರಡೂ ಶ್ವಾಸಕೋಶಗಳಿಗೂ ನ್ಯೂಮೋನಿಯಾ ಹಾಗೂ ಕಿಡ್ನಿ, ಲಿವರ್ ಸೇರಿದಂತೆ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು.
‘ಯೋಧನ ಸ್ಥಿತಿ ಇನ್ನೂ ಗಂಭೀರವಾಗಿದೆ. ನಾವು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಮುಂದಿನ 2, 3 ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುವುದು’ ಎಂದು ನಿನ್ನೆ ಆರ್ ಆರ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು.
ಲ್ಯಾನ್ಸ್ ನಾಯಕ್ ಹನುಮಂತಪ್ಪ ಕೊಪ್ಪದ್ ಅವರ ಆರೋಗ್ಯ ಸ್ಥಿತಿ ಕೋಮಾ ಸ್ಥಿತಿಯಲ್ಲೇ ಮುಂದುವರಿದಿದ್ದು, ಆರ್ ಆರ್ ಆಸ್ಪತ್ರೆಯ 7 ಜನರ ವೈದ್ಯರ ತಂಡ ಕೊಪ್ಪದ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದರು.
ವೈದ್ಯರು ಪಟ್ಟ ಶ್ರಮ, ದೇಶದ ಕೋಟ್ಯಂತರ ಜನರ ಪ್ರಾರ್ಥನೆ, ಅವರ ಊರಾದ ಬೆಟದೂರಿನಲ್ಲಿ ಸೇರಿದಂತೆ ಹಲವಾರು ಕಡೆಗಳಲ್ಲಿ ನಡೆದ ಹೋಮ ಹವನಗಳು ಯಾವುದೇ ಪ್ರಯೋಜನಕ್ಕೆ ಬರಲಿಲ್ಲ. ಅವರ ಸಾವು ಸಂಭವಿಸುತ್ತಿದ್ದಂತೆ ಇಡೀ ದೇಶ ಶೋಕಸಾಗರದಲ್ಲಿ ಮುಳುಗಿದೆ.
ಹನುಮಂತಪ್ಪ ಅವರ ದೇಹವನ್ನು ಅವರ ಹುಟ್ಟಿದೂರಾದ ಬೆಟದೂರಿಗೆ ತರುವ ಎಲ್ಲ ವ್ಯವಸ್ಥೆಗಳನ್ನು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಯೋಧನ ಕುಟುಂಬಕ್ಕೆ ಸಕಲ ನೆರವು ನೀಡುವುದಾಗಿ ಧಾರವಾಡದ ಉಸ್ತುವಾರಿ ಸಚಿವ ವಿನಯ್ ಕುಲಕರ್ಣಿ ಅವರು ತಿಳಿಸಿದ್ದಾರೆ.
