ಬಂಟ್ವಾಳ: ಕಳೆದ ಮಾ. 17ರಂದಿ ಪಾಕೃತಿಕ ವಿಕೋಪದಿಂದ ಉಂಟಾದ ಹಾನಿಗೆ ಸರ್ಕಾರ ಸ್ಪಂದಿಸಿಲ್ಲ ಎನ್ನುವ ಬಿಜೆಪಿಯ ಆರೋಪ ರಾಜಕೀಯ ಪ್ರೇರಿತ ಎಂದು ಬಂಟ್ವಾಳ ತಾಲುಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರಾ ತಿರುಗೇಟು ನೀಡಿದ್ದಾರೆ.
ಭಾನುವಾರ ಸಂಜೆ ಬಿ.ಸಿ.ರೋಡಿನ ಪ್ರೆಸ್ಕ್ಲಬ್ನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಅಭಿವೃದ್ದಿ ಕಾರ್ಯಗಳಿಂದ ಕಂಗಾಲಾಗಿರುವ ಬಿಜೆಪಿ ನೀರಿನಿಂದ ತೆಗೆದ ಮೀನಿನಂತೆ ವಿಲವಿಲನೆ ಚಡಪಡಿಸುತ್ತಿದ್ದು ವಿನಾಕಾರಣ ಅಪಪ್ರಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದರು.
ಘಟನೆ ನಡೆದಂದು ರಾತ್ರಿಯೇ ಜಿಲ್ಲಾ, ತಾಲೂಕು, ಗ್ರಾಮ ಪಂಚಾಯತ್ಗಳ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವಾನ ಹಾಗೂ ಸೂಕ್ತ ಪರಿಕಾರದ ಭರವಸೆ ನೀಡಿದ್ದಾರೆ. ಅಧಿಕಾರಿಗೊಂದಿಗೆ ತೆರಳಿ ರಸ್ತೆಗೆ ರಸ್ತೆಗೆ ಬಿದ್ದಿದ್ದ ಮರಗಳನ್ನು ತೆರವುಗೊಳಿಸವ ಕಾರ್ಯಗಳಲ್ಲೂ ಭಾಗಿಯಾಗಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮನಾಥ ರೈಯವರಿಗೆ ತಕ್ಷಣ ಮಾಹಿತಿ ನೀಡಿದ್ದು ಅವರ ಸೂಚನೆಯಂತೆ ಸಹಾಯಕ ಆಯುಕ್ತರು ಹಾಗೂ ಅಧಿಕಾರಿಗಳ ತಂಡ ಮರುದಿನ ಬೆಳಿಗ್ಗೆಯಿಂದಲೇ ಕಾರ್ಯಚರಣೆಯಲ್ಲಿ ಭಾಗಿಯಾಗಿದೆ.
ಇಷೆಲ್ಲಾವನ್ನು ಕಣ್ಣಾರೆ ಕಂಡಿದ್ದರೂ ಬಿಜೆಪಿ ಮುಖಂಡರು ಟೀಕೆಯಲ್ಲಿ ತೊಡಗಿದ್ದಾರೆ. 322 ಮನೆಗಳ ಪೈಕಿ ಭಾಗಶಃ ಹಾನಿಗೊಂಡಿರುವ 160 ಮನೆಗಳಿಗೆ 15 ಲಕ್ಷ ರೂಪಾಯಿ ಪರಿಹಾರ ಧನವನ್ನು ಈಗಾಗಲೇ ವಿತರಿಸಲಾಗಿದೆ. ಉಳಿದ ಸಂತ್ರಸ್ತರಿಗೆ, ಪೂರ್ಣ ಪ್ರಮಾಣದಲ್ಲಿ ಮನೆ ಹಾಗೂ ತೋಟಗಳನ್ನು ಕಳಕೊಂಡ ಸಂತ್ರಸ್ತರಿಗೆ ಪರಿಹಾರ ನೀಡಲು ಸರ್ವೆ ಕಾರ್ಯ ನಡೆಯುತ್ತಿದ್ದು ಶೀಘ್ರದಲ್ಲೇ ಎಲ್ಲರಿಗೂ ಪರಿಹಾರ ವಿತರಿಸಲಾಗುವುದು ಎಂದು ತಿಳಿಸಿದರು. ಪ್ರಾಕೃತಿಕ ವಿಕೋಪವನ್ನು ಬಳಸಿಕೊಂಡು ಆರೋಪ ಮಾಡುತ್ತಿರುವುದು ಅತ್ಯಂತ ಕೀಳು ಮಟ್ಟದ ರಾಜಕೀಯ. ಆರೋಪದಿಂದ ದೂರ ನಿಂತು ಇನ್ನಾದರೂ ಬಿಜೆಪಿ ನಾಯಕರು ಜನಪರ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿ ಎಂದು ಚಾಟಿ ಬೀಸಿದರು.
ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ಬಾಸ್ ಅಲಿ ಮಾತನಾಡಿ ಬಿಜೆಪಿಯ ಆರೋಪ ಆಧಾರ ರಹಿತ. ಬಿಜೆಪಿಯ ಮುಖಂಡರು ಎಷ್ಟೇ ಟೀಕೆ, ಆರೋಪ ಮಾಡಿದರೂ ಕಾಂಗ್ರೆಸ್ ಅಭಿವೃದ್ದಿಯಂದ ಹಿಂದೆ ಉಳಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಬೂಡಾ ಅಧ್ಯಕ್ಷ ಪಿಯೂಸ್ ರೊಡ್ರಿಗಸ್ ಮಾತನಾಡಿ ವಿದ್ಯುತ್ ಕಂಬದ ಮೇಲೆ 600 ಕೆ.ಜಿ.ಗಿಂತ ಅಧಿಕ ಭಾರ ಬಿದ್ದಾಗ ಮಾತ್ರ ಕಂಬಗಳು ಮುರಿಯುತ್ತವೆ ಹೊರತು ಕೇವಲ ಗಾಳಿಗೆ ಮುರಿಯುವುದಿಲ್ಲ. ಈ ಬಗ್ಗೆ ಆರೋಪ ಮಾಡುವವರು ವೈಜ್ಞಾನಿಕತೆ ಹಾಗೂ ತಾಂತ್ರಿಕತೆಯನ್ನು ಅರಿತುಕೊಂಡು ಮಾತನಾಡ ಬೇಕು ಎಂದರು.
ಸುದ್ದಿಗೋಷ್ಟಿಯಲ್ಲಿ ಜಿ.ಪಂ.ಸದಸ್ಯ ಪದ್ಮಶೇಖರ್ ಜೈನ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಪುರಸಭಾ ಅಧ್ಯಕ್ಷ ರಾಮಾಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು ಉಪಸ್ಥಿತರಿದ್ದರು.
