ಬಂಟ್ವಾಳ:ತಾಲ್ಲೂಕಿನ ವಾಮದಪದವು ಸಮೀಪದ ಅಜ್ಜಿಬೆಟ್ಟು ಕಂಜಾರು ನಿವಾಸಿ ಪ್ರಗತಿಪರ ಕೃಷಿಕ ಚಂದ್ರಶೇಖರ ಶೆಟ್ಟಿ (38) ಇವರು ಶಂಕಿತ ಡೆಂಗೆ ಜ್ವರದಿಂದ ಶನಿವಾರ ರಾತ್ರಿ ಸಾವನ್ನಪ್ಪಿದ್ದಾರೆ. ಕಳೆದ ಒಂದು ವಾರದ ಹಿಂದೆಯಷ್ಟೇ ವಾಮದಪದವು ಸಮುದಾಯ ಆರೋಗ್ಯಕೇಂದ್ರದಲ್ಲಿ ತಲೆನೋವು ಮತ್ತು ಜ್ವರಕ್ಕೆ ಔಷಧಿ ಪಡೆದುಕೊಂಡು ಬಳಿಕ ಜ್ವರ ಹೆಚ್ಚಾಗುತ್ತಿದ್ದಂತೆಯೇ ಮಂಗಳೂರಿನ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ ಸಾವನ್ನಪ್ಪಿರುವ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ಅನಾಥರಾದ ಮೃತರ ಪತ್ನಿ ಮತ್ತು ಇಬ್ಬರು ಪುಟ್ಟ ಹೆಣ್ಮಕ್ಕಳಿಗೆ ಆರೋಗ್ಯ ಇಲಾಖೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

