ಬಂಟ್ವಾಳ : ಕರ್ನಾಟಕದಲ್ಲಿ ಹಾಸ್ಟೆಲ್ ಪರಿಕಲ್ಪನೆಯನ್ನು ಹುಟ್ಟು ಹಾಕಿ ಬಡ ಹಿಂದುಳಿದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಮೇಲ್ಪಂಕ್ತಿ ಹಾಕಿದ ಓರ್ವ ಮೇಧಾವಿ ಮುಖ್ಯ ಮಂತ್ರಿಯಾಗಿ ಗುರುತಿಸಿಕೊಂಡವರು ದಿ.ಡಿ ದೇವರಾಜ ಅರಸು ಎಂದು ಬಿ.ಮೂಡ ಸರಕಾರಿ ಪದವಿಪೂರ್ವ ಕಾಲೇಜು ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಕೊಂಡಾಡಿದರು.
ತಾಲೂಕು ಆಡಳಿತ , ತಾಲೂಕು ಪಂಚಾಯತ್, ಪುರಸಭೆ ಹಾಗೂ ತಾ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಬಿ.ಸಿ.ರೋಡ್ ನ ಎಸ್.ಜೆ.ಎಸ್.ವೈ ಸಭಾಂಗಣದಲ್ಲಿ ನಡೆದ ಹಿಂದುಳಿದ ವರ್ಗಗಳ ಧೀಮಂತ ನಾಯಕ ಮಾಜಿ ಮುಖ್ಯ ಮಂತ್ರಿ ಡ.ದೇವರಾಜ್ ಅರಸು ರವರ 101ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸಕರಾಗಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಉಚಿತ ವಸತಿ ನಿಲಯ, ಭೂಸುಧಾರಣೆ , ಕಾನೂನಿನ ಕಟ್ಟು ನಿಟ್ಟಿನ ಜಾರಿ, ಜನತಾಮನೆ, ಭಾಗ್ಯಜ್ಯೋತಿ ಮೊದಲಾದ ಹತ್ತುಹಲವು ಜನಪರ ಕಾರ್ಯಕ್ರಮಗಳ ಮೂಲಕ ಜನಮಾನಸದಲ್ಲಿ ಇಂದಿಗೂ ಉಳಿದಿರುವ ಓರ್ವ ಅಪ್ರತಿಮ ಆಡಳಿತಗಾರ ಅರಸು ಅವರಾಗಿದ್ದರು ಎಂದರು.

ಕರ್ನಾಟಕ ರಾಜ್ಯಕ್ಕೆ ಭದ್ರಬುನಾದಿಯನ್ನು ಹಾಕಿಕೊಟ್ಟ ಡಿ.ದೇವರಾಜ ಅರಸು ಅವರು ಕೇವಲ ಒಂದು ವರ್ಗಕ್ಕೆ ಸೀಮಿತವಾಗಿರದೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ನೀಡಿದ ಕೊಡುಗೆ ಅನನ್ಯ ಎಂದು ಅವರು ಹೇಳಿದರು. ತಾ.ಪಂ.ಅಧ್ಯಕ್ಷ ಚಂದ್ರಶೇಖರ ಕರ್ಕೇರಾ ಉದ್ಘಾಟಿಸಿದರು. ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ , ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರಾ, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಜಿ.ಪಂ.ಸದಸ್ಯರಾದ ಎಂ.ಎಸ್.ಮಹಮ್ಮದ್, ರ ವೀಂದ್ರ ಕಂಬಳಿ, ಮಂಜುಳಾ ಮಾಧವ ಮಾವೆ, ಕಮಲಾಕ್ಷಿ ಕೆ.ಪೂಜಾರಿ, ತಾ.ಪಂ.ಸದಸ್ಯರುಗಳಾದ ಸಂಜೀವ ಪೂಜಾರಿ , ಗಣೇಶ್ ಸುವರ್ಣ, ಯಶವಂತ ಪೂಜಾರಿ, ಪದ್ಮಶ್ರೀ, ತಹಶೀಲ್ದಾರ್ ಪುರಂದರ ಹೆಗಡೆ ಮುಂತಾದವರು ಉಪಸ್ಥಿತರಿದ್ದರು. ಇದೇ ವೇಳೆ ಕಾರ್ಯಕ್ರಮದ ಪ್ರಯುಕ್ತ ಹಿಂದುಳಿದ ವರ್ಗದ ವಸತಿನಿಲಯದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಹಿಂದುಳಿದ ವರ್ಗದ ಕಲ್ಯಾಣ ಇಲಾಖೆಯ ಜಯಣ್ಣ ಸ್ವಾಗತಿಸಿದರು. ಶಿವಣ್ಣ ಪ್ರಸ್ತಾವನಗೈದರು. ಮಂಜು ವಿಟ್ಲ ಕಾರ್ಯಕ್ರಮ ನಿರೂಪಿಸಿದರು.


