ವಿಟ್ಲ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ಬಂಟ್ವಾಳ ವೃತ್ತ ನಿರೀಕ್ಷಕರ ತಂಡ ವಶಕ್ಕೆ ಪಡೆದುಕೊಂಡ ಘಟನೆ ಶುಕ್ರವಾರ ಬೆಳಿಗ್ಗೆ ಮಾಣಿ ಎಂಬಲ್ಲಿ ನಡೆದಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರು ಕಡೆಯಿಂದ ಪುತ್ತೂರು ಕಡೆಗೆ ಎರಡು ಲಾರಿಗಳು ಮರಳು ಸಾಗಾಟ ನಡೆಸುತ್ತಿದ್ದು, ಭಾರತ ಬಂದ್ ಹಿನ್ನೆಲೆಯಲ್ಲಿ ಬಂಟ್ವಾಳ ವೃತ್ತ ನಿರೀಕ್ಷಕ ಮಂಜಯ್ಯ ಮತ್ತು ವಿಟ್ಲ ಪೊಲೀಸರ ತಂಡ ಮಾಣಿ ಸಮೀಪ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಎರಡು ಲಾರಿಗಳನ್ನು ತಡೆದು ನಿಲ್ಲಿಸಿ ವಿಚಾರಣೆ ನಡೆಸುತ್ತಿದ್ದ ಸಂದರ್ಭ ಅಕ್ರಮ ಮರಳು ಸಾಗಾಟದ ಲಾರಿಗಳು ಎಂಬುದು ಬೆಳಕಿಗೆ ಬಂದಿದೆ. ಬಳಿಕ ಅದನ್ನು ವಶಕ್ಕೆ ಪಡೆದುಕೊಂಡು ಗಣಿ ಇಲಾಖೆಗೆ ಹಸ್ತಾಂತರ ಮಾಡಿದ್ದಾರೆ.
