ಬಂಟ್ವಾಳ: ಬೆಂಗಳೂರು ಶಿವಾಜಿನಗರದ ಬಳಿ ಇತ್ತೀಚೆಗೆ ನಡೆದ ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಬೆಂಗಳೂರು ಜಿಲ್ಲಾಧ್ಯಕ್ಷ ಹಾಶಿಮ್ ಶರೀಫ್ ಅವರನ್ನು ಪೊಲೀಸರು ವಿನಾ ಕಾರಣ ಬಂಧಿಸಿದ್ದಾರೆ ಎಂದು ಆರೋಪಿಸಿ ಇಲ್ಲಿನ ಪಿಎಫ್ಐ ಘಟಕದ ವತಿಯಿಂದ ಬಿ.ಸಿ.ರೋಡ್ನಲ್ಲಿ ಗುರುವಾರ ಸಂಜೆ ದಿಢೀರ್ ಪ್ರತಿಭಟನೆ ನಡೆಯಿತು.
ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನಾಲ್ವರನ್ನು ಬಂಧಿಸಿದ್ದು, ಕೆಲವೊಂದು ವೈಯಕ್ತಿಕ ದ್ವೇಷದಿಂದ ಆರೆಸ್ಸೆಸ್ ಕಾರ್ಯಕರ್ತನ ಕೊಲೆ ನಡೆದಿದೆ ಎಂದು ಬಹಿರಂಗಗೊಂಡಿದ್ದರೂ ಹಾಶಿಫ್ ಶರೀಫ್ ವಿರುದ್ಧ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಮತ್ತು ಆರೆಸ್ಸೆಸ್ ಮುಖಂಡರು ಪೊಲೀಸರ ಮೇಲೆ ಒತ್ತಡ ಹೇರಿ ತನಿಖೆಯ ಹಾದಿ ತಪ್ಪಿಸುವ ಷಡ್ಯಂತ್ರವಾಗಿ ಈ ಬಂಧನ ನಡೆದಿದೆ ಎಂದು ಅವರು ಟೀಕಿಸಿದರು.
ಸಂಘಟನೆ ತಾಲ್ಲೂಕು ಅಧ್ಯಕ್ಷ ಝಕರಿಯಾ ಗೋಳ್ತಮಜಲು, ಉಪಾಧ್ಯಕ್ಷ ಅಬೂಬಕ್ಕರ್ ಸಿದ್ದೀಕ್ ಕಲ್ಲಡ್ಕ, ಪ್ರಧಾನ ಕಾರ್ಯದರ್ಶಿ ಸಲೀಂ ಕುಂಪನಮಜಲು, ಕಾರ್ಯದರ್ಶಿ ಇಜಾಝ್ ಅಹ್ಮದ್ ಪಾಣೆಮಂಗಳೂರು, ಮುಖಂಡ ಶಬೀರ್ ಶಾಂತಿಅಂಗಡಿ ಮತ್ತಿತರರು ಇದ್ದರು.

