ಬಂಟ್ವಾಳ: ಜಿಲ್ಲೆಯ ಜೀವನದಿ ನೇತ್ರಾವತಿ ಬರಿದುಗೊಳಿಸುವ ಎತ್ತಿನಹೊಳೆ ಯೋಜನೆ ವಿರುದ್ಧ ಜ.26ರಿಂದ ಉಗ್ರ ಸ್ವರೂಪದಲ್ಲಿ ಪ್ರತಿಭಟನೆ ನಡೆಸುವುದಾಗಿ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ತಾಲ್ಲೂಕಿನ ದಡ್ಡಲಕಾಡು ಸರಿ ಪ್ರಾಥಮಿಕ ಶಾಲೆಗೆ ಬುಧವಾರ ಭೇಟಿ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತುಕತೆ ನಡೆಸಿದರು.
ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೆಂಗಳೂರಿನಲ್ಲಿ ಏರ್ಪಡಿಸಿದ್ದ ಕಾಟಾಚಾರದ ಸಭೆ ವಿಫಲಗೊಂಡಿದ್ದು, ಅಂದು ಈ ಜಿಲ್ಲೆಯ ಸಚಿವರು ಮತ್ತು ಶಾಸಕರು ದರ್ಪ ಮತ್ತು ಅಹಂಕಾರದಿಂದ ವತರ್ಿಸಿದ್ದಾರೆ ಎಂದು ಆರೋಪಿಸಿದರು. ಬಿಜೆಪಿ ಹೋರಾಟಗಾರರನ್ನು ‘ಗೋಡ್ಸೆವಾದಿ’ಗಳು ಎಂದು ಕರೆದಿರುವ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸಹಿತ ಅಂದು ಸಭೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಶಾಸಕರು ಲಾಡೆನ್ನಂತೆ ವತರ್ಿಸಿದ್ದರಿಂದ ಅವರನ್ನು ‘ಲಾಡೆನ್’ವಾದಿಗಳು ಎಂದು ಕರೆಯಬೇಕೇ…? ಎಂದು ಅವರು ಪ್ರಶ್ನಿಸಿದರು.
ರಾಜ್ಯ ನೀರಾವರಿ ಸಚಿವ ಎಂ.ಬಿ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಕೋಲಾರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ತಜ್ಞರ ತಂಡವನ್ನು ರಚಿಸಿ ಎತ್ತಿನಹೊಳೆ ಯೋಜನೆ ಸಾಧಕ-ಬಾಧಕಗಳ ಬಗ್ಗೆ ಸಮರ್ಪಕ ಅಧ್ಯಯನ ನಡೆಸಿದ ಬಳಿಕ ನಿಜಕ್ಕೂ ಈ ಜಿಲ್ಲೆಗೆ ಸಮಸ್ಯೆ ಇಲ್ಲ ಎಂದಾದರೆ ಕಾಮಗಾರಿ ಮುಂದುವರಿಕೆಗೆ ನಮ್ಮ ಅಭ್ಯಂತರ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ ನಾಯ್ಕ್, ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ತುಂಗಪ್ಪ ಬಂಗೇರ, ಪ್ರಮುಖರಾದ ಜಿ.ಆನಂದ, ಬಿ.ದೇವದಾಸ ಶೆಟ್ಟಿ, ಪ್ರಕಾಶ ಅಂಚನ್, ಸೀತಾರಾಮ ಶೆಟ್ಟಿ ಮತ್ತಿತರರು ಇದ್ದರು.

