ಬಂಟ್ವಾಳ; ಸಮಾಜದಲ್ಲಿ ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಆತಂಕಕಾರಿ ವಿಚಾರ ಎಂದು ದ.ಕ.ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಉಮೇಶ್ ನಿರ್ಮಲ್ ಹೇಳಿದ್ದಾರೆ.
ಪ್ರಜ್ಞಾ ಸಲಹಾ ಕೇಂದ್ರ ಕಂಕನಾಡಿ ಇದರ ಹೆಣ್ಣುಮಕ್ಕಳ ಸಂರಕ್ಷಣಾ ಹಕ್ಕುಗಳನ್ನು ಬಲಪಡಿಸುವ ಯೋಜನೆಯಡಿ, ಬಂಟ್ವಾಳ ಲಯನ್ಸ್ ಕ್ಲಬ್ ಸಹಯೋಗದಲ್ಲಿ ಮಂಗಳವಾರ ಬಿಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆದ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಮಾಹಿತಿಯ ಕೊರತೆಯಿಂದಾಗಿ ಸರ್ಕಾರದ ಹಲವು ಕಾನೂನು, ಸಾಂತ್ವನದ ವಿಚಾರಗಳು ಜನರಿಗೆ ತಲುಪುತ್ತಿಲ್ಲ, ಹೀಗಾಗಿ ಇಂತಹಾ ಪ್ರಕರಣಗಳ ಸಂಖ್ಯೆ ಏರುತ್ತಿದ್ದು, ಈ ಬಗ್ಗೆ ಜನಜಾಗೃತಿ ಅಗತ್ಯ ಎಂದರು.

ಬಂಟ್ವಾಳ ತಾ.ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೌನೇಶ ವಿಶ್ವಕರ್ಮ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಲಿಂಗತಾರತಮ್ಯ, ಬಾಲ್ಯವಿವಾಹ, ಹೆಣ್ಣು ಮಕ್ಕಳ ದೌರ್ಜನ್ಯಗಳ ಕುರಿತಾಗಿ ಜಾಗೃತಿ ಕಾರ್ಯಕ್ರಮ ನಡೆಸಿಕೊಟ್ಟರು. ಯೋಜನಾಧಿಕಾರಿ ಲಲಿತಾ ಶೆಟ್ಟಿ ಸ್ವಾಗತಿಸಿದರು. ತರಬೇತಿ ಅಧಿಕಾರಿ ಡೆನ್ನಿಸ್ ಡಿಸೋಜಾ ವಂದಿಸಿದರು. ಸಿಬ್ಬಂದಿ ವಿಶಾಲಾಕ್ಷಿ ಕಾರ್ಯಕ್ರಮ ನಿರ್ವಹಿಸಿದರು. ತಾಲೂಕಿನ ಖಾಸಗಿ ಹಾಗೂ ಅನುದಾನಿತ ಶಾಲಾ ಶಿಕ್ಷಕರು, ಸ್ತ್ರೀ ಶಕ್ತಿಗುಂಪುಗಳ ಸದಸ್ಯರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
