ಸಾಮಾಜಿಕ ಸಾಮರಸ್ಯ ಕಾಂಗ್ರೆಸ್ಸಿನ ಆಸ್ತಿ: ಸಚಿವ ರೈ
ಬಂಟ್ವಾಳ:ಬ್ರಿಟೀಷರ ದಾಸ್ಯ ಸಂಕೋಲೆಯಿಂದ ಭಾರತೀಯರನ್ನು ಬಂಧಮುಕ್ತಗೊಳಿಸಲು ಹೋರಾಟ ನಡೆಸಿ ಜೈಲು ಸೇರಿ ಪ್ರಾಣ ತ್ಯಾಗ ಮಾಡಿದ ಮಹಾತ್ಮರನ್ನು ಕೂಡಾ ಟೀಕಿಸುವ ಮಂದಿ ಇರುವ ಈ ಸಮಾಜದಲ್ಲಿ ಅಂತಹ ಟೀಕೆಗಳನ್ನು ಕಡೆಗಣಿಸಿ ಸಮಾಜದಲ್ಲಿ ಪರಸ್ಪರ ಸಾಮರಸ್ಯ ಮೂಡಿಸುವುದೇ ಕಾಂಗ್ರೆಸ್ಸಿನ ಪ್ರಮುಖ ಧ್ಯೇಯ ಮತ್ತು ನೈಜ ಆಸ್ತಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಬಂಟ್ವಾಳ ತಾಲ್ಲೂಕಿನ ನರಿಕೊಂಬು ವಲಯ ಕಾಂಗ್ರೆಸ್ ಸಮಿತಿ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ವತಿಯಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮಶತಾಬ್ಧಿ ಮತ್ತು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮರಣಾರ್ಥ ನರಿಕೊಂಬು ಗ್ರಾಮ ಪಂಚಾಯಿತಿ ಬಳಿ ಭಾನುವಾರ ರಾತ್ರಿ ಏರ್ಪಡಿಸಿದ್ದ ಹೊನಲು ಬೆಳಕಿನ ‘ಮ್ಯಾಟ್ ಕಬಡ್ಡಿ ಪಂದ್ಯಾಟ, ಹಿರಿಯ ಕಾಂಗ್ರೆಸ್ಸಿಗರು ಮತ್ತು ಕೀಡಾ ಸಾಧಕರಿಗೆ ಸನ್ಮಾನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

27btl-Kabaddi
ದೇಶದಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ದೂರದೃಷ್ಟಿಯ ಚಿಂತನೆ ಮತ್ತು ಅಂದಿನ ದಿಟ್ಟ ಮಹಿಳೆ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರ ಕೆಚ್ಚೆದೆಯ ನಿರ್ಧಾರದಲ್ಲಿ ಬ್ಯಾಂಕ್ ರಾಷ್ಟ್ರೀಕರಣಗೊಂಡಿದೆ. ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಮೂಲಕ ಭೂಮಸೂದೆ ಕಾಯ್ದೆ ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಪರಿಣಾಮ ಇದೀಗ ಸ್ವಾಭಿಮಾನದ ಬದುಕು ಮತ್ತು ‘ಹಸಿವುಮುಕ್ತ ಸಮಾಜ’ ನಿರ್ಮಿಸಲು ಸಾಧ್ಯವಾಗುತ್ತ್ತಿದೆ ಎಂದು ಅವರು ವಿವರಿಸಿದರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ಬಾಸ್ ಆಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದೇ ವೇಳೆ ಸ್ಥಳೀಯ 9 ಮಂದಿ ಹಿರಿಯ ಕಾಂಗ್ರೆಸಿಗರು ಮತ್ತು 7ಮಂದಿ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಸನ್ಮಾನಿಸಲಾಯಿತು.
ಬಂಟ್ವಾಳ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಸದಸ್ಯೆ ಗಾಯತ್ರಿ ರವೀಂದ್ರ ಸಪಲ್ಯ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಚಂದ್ರಪ್ರಕಾಶ ಶೆಟ್ಟಿ, ಎಂ.ಎಸ್.ಮಹಮ್ಮದ್, ಬಿ.ಪದ್ಮಶೇಖರ ಜೈನ್, ಮಮತಾ ಎಸ್.ಗಟ್ಟಿ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಎಚ್.ಖಾದರ್, ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ ಸುದರ್ಶನ್ ಜೈನ್, ಬೂಡಾ ಮಾಜಿ ಅಧ್ಯಕ್ಷ ಪಿಯೂಸ್ ಎಲ್.ರಾಡ್ರಿಗಸ್, ಎಪಿಎಂಸಿ ಅಧ್ಯಕ್ಷ ಕೆ.ಪದ್ಮನಾಭ ರೈ, ಉಪಾಧ್ಯಕ್ಷ ಚಂದ್ರಶೇಖರ ಪೂಜಾರಿ, ಧಾರ್ಮಿಕ ಪರಿಷತ್ ಸದಸ್ಯ ಜಗನ್ನಾಥ ಚೌಟ, ಕ್ರೀಡಾಪಟು ಬೇಬಿ ಕುಂದರ್, ಮೆಸ್ಕಾಂ ಸಮಿತಿ ಸದಸ್ಯ ವೆಂಕಪ್ಪ ಪೂಜಾರಿ, ಪ್ರಮುಖರಾದ ಸಚ್ಚಿದಾನಂದ ಶೆಟ್ಟಿ ಬೊಂಡಾಲ, ದೇವದಾಸ ಹೆಗ್ಡೆ ಅಡ್ಯಾರು, ದಿನೇಶ ಶೆಣೈ ಕಲ್ಲಡ್ಕ, ಪಿ.ಎಸ್.ಅಬ್ದುಲ್ ಹಮೀದ್ ಮತ್ತಿತರರು ಶುಭ ಹಾರೈಸಿದರು.
ನರಿಕೊಂಬು ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ಕೆಡಿಪಿ ಸದಸ್ಯ ಉಮೇಶ ಬೋಳಂತೂರು ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ ಆಲ್ಬರ್ಟ್ ಮಿನೇಜಸ್ ವಂದಿಸಿದರು. ಹಮೀದ್ ಗೋಳ್ತಮಜಲು ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *