ಬೆಂಗಳೂರು: ಮುಂಬರುವ 2018ರ ರಾಜ್ಯ ವಿಧಾನಸಭಾ ಚುನಾವಣೆಗೆ ಸಮಾರೋಪಾದಿ ಸಿದ್ಧ್ದತೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಇಂದಿನಿಂದ ರಾಜ್ಯಾದ್ಯಂತ ಆರು ದಿನಗಳ ಪ್ರವಾಸ ನಡೆಸಲಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಪ್ರವಾಸದ ನೇತೃತ್ವ ವಹಿಸಲಿದ್ದು, ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಬಾಗಲಕೋಟೆ, ಬೆಳಗಾವಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೈ ನಾಯಕರ ದಂಡು ಪ್ರವಾಸದ ಜೊತೆ ಸಭೆಗಳನ್ನೂ ನಡೆಸಲಿದೆ
.
ಈ ಪ್ರಚಾರಾಂದೋಲನ ಪ್ರವಾಸದಲ್ಲಿ ಸಚಿವರು, ಶಾಸಕರು, ಸಂಸದರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಪದಾಧಿಕಾರಿಗಳು, ಪಕ್ಷದ ವಿವಿಧ ವಿಭಾಗಗಳ ಅಧ್ಯಕ್ಷರು, ಹಿರಿಯ ಮುಂಖಡರುಗಳ ಜೊತೆಗಿನ ಸಭೆಗೆ ಈಗಾಗಲೇ ದಿನಾಂಕ ಮತ್ತು ಸಮಯಗಳನ್ನು ನಿಗಧಿ ಮಾಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇಂದು ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಪ್ರಮುಖವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಪದಾಧಿಕಾರಿಗಳು ಮತ್ತಿತರ ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ನಂತರ ರಾಜ್ಯ ಪ್ರವಾಸ ಆರಂಭವಾಗಲಿದೆ ಎಂದು ಮೂಲಗಳು ಹೇಳಿವೆ.
