ಬೆಂಗಳೂರು, ಕೇರಳದಲ್ಲಿರುವ ಶಬರಿಮಲೆಗೆ ರಾಜ್ಯದಿಂದ ತೆರಳುವ ಭಕ್ತಾಧಿಗಳ ಅನುಕೂಲಕ್ಕಾಗಿ ವೈದ್ಯಕೀಯ ಸೌಲಭ್ಯ, ಸಹಾಯವಾಣಿ, ರಕ್ಷಣೆ ಮತ್ತು ನೆರವು ನೀಡಲು ಉಪ ಕಚೇರಿಯೊಂದನ್ನು ತೆರೆಯಲು ಧಾರ್ಮಿಕ ದತ್ತಿ ಇಲಾಖೆಗೆ 25ಲಕ್ಷ ರೂ.ವನ್ನು ಸರ್ಕಾರ ಬಿಡುಗಡೆ ಮಾಡಿದೆ. ಧಾರ್ಮಿಕ ಮತ್ತು ದತ್ತಿ ಇಲಾಖೆ ಆಯುಕ್ತರೂ ಈ ಅನುದಾನವನ್ನು ಬಳಸಿಕೊಂಡು ಭಕ್ತಾಧಿಗಳಿಗೆ ಅಗತ್ಯ ಮೂಲ ಸೌಲಭ್ಯವನ್ನು ಕಲ್ಪಿಸಿಕೊಡುವಂತೆ ಸೂಚಿಸಲಾಗಿದೆ.
ಪ್ರಸಕ್ತ ಸಾಲಿನಲ್ಲಿ 50ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಶಬರಿಮಲೆಗೆ ತೆರಳುವ ನಿರೀಕ್ಷೆ ಇದ್ದು, ಈ ಹಿನ್ನೆಲೆಯಲ್ಲಿ ಉಪ ಕೇಂದ್ರವೊಂದನ್ನು ತೆರೆಯಲು ಉದ್ದೇಶಿಸಲಾಗಿದೆ.
ಕೇರಳ ಪ್ರವೇಶಿಸುವ ರಾಜ್ಯದ ಭಕ್ತಾಧಿಗಳ ಅನುಕೂಲಕ್ಕಾಗಿ ನಾಲ್ಕು ಮುಖ್ಯ ಸ್ಥಳಗಳಲ್ಲಿ ತಾತ್ಕಾಲಿಕ ಮಾಹಿತಿ ಕೇಂದ್ರಗಳನ್ನು ತೆರೆದು ಸೂಕ್ತ ಮಾಹಿತಿ ನೀಡಲಾಗುತ್ತದೆ. ಪಂಪ, ನೀಲಕಲ್, ಕೊಟ್ಟಾಯಂ ಸೇರಿದಂತೆ ಅವಶ್ಯಕ ಸ್ಥಳಗಳಲ್ಲಿ ತಾತ್ಕಾಲಿಕ ಸೇವಾ ಮತ್ತು ಮಾಹಿತಿ ಕೇಂದ್ರವನ್ನು ತೆರೆಯಲಾಗುತ್ತದೆ.
ಅಲ್ಲದೆ, ಗಡಿ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿ ಹಾಗೂ ತಹಸೀಲ್ದಾರ್ ಕಚೇರಿಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆದು ಭಕ್ತಾಧಿಗಳಿಗೆ ಕಾಲ ಕಾಲಕ್ಕೆ ಅಗತ್ಯ ಮಾಹಿತಿ ನೀಡಲು ಧಾರ್ಮಿಕ ಮತ್ತು ದತ್ತಿ ಇಲಾಖೆ ಉದ್ದೇಶಿಸಿದೆ.
