ಬಂಟ್ವಾಳ; ಕ್ರೀಡಾ ಚಟುವಟಿಕೆಗಳಿಂದ ನಮ್ಮ ಆರೋಗ್ಯ ಉಲ್ಲಾಸಮಯವಾಗುತ್ತದೆ, ಹೀಗಾಗಿ ಕ್ರೀಡೆಗಳಲ್ಲಿ ಬಹುಮಾನ ಪಡೆಯುವುದಕ್ಕಿಂತಲೂ ಭಾಗವಹಿಸುವುದು ಮುಖ್ಯ ಎಂದು ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಸಂಚಾಲಕ ಜೆ.ಪ್ರಹ್ಲಾದ್ ಶೆಟ್ಟಿ ಹೇಳಿದ್ದಾರೆ.
ಅವರು ಶನಿವಾರ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ಪೋಷಕರ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಶಾಲಾ ಆಡಳಿತಾಧಿಕಾರಿ ಸಿ.ಶ್ರೀಧರ್, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ ವಿ.ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಗ್ರೇಸ್ ಪಿ.ಸಲ್ದಾನ, ದೈಹಿಕ ಶಿಕ್ಷಕಿ ವಿಶಾಲಾಕ್ಷಿ ಎಚ್.ಆಳ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪೋಷಕರ ವಾರ್ಷಿಕ ಕ್ರೀಡಾಕೂಟದ ಅಂಗವಾಗಿ ಶಿಕ್ಷಕ ರಕ್ಷಕ ಸಂಘದ ಪದಾಧಿಕಾರಿಗಳು ಹಾಗೂ ಶಾಲಾ ಶಿಕ್ಷಕರ ನೇತೃತ್ವದಲ್ಲಿ ಪೋಷಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು.
