ಬಂಟ್ವಾಳ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ 2015-16ನೇ ಸಾಲಿನಲ್ಲಿ ರೈತರಿಗಾಗಿ ಉಚಿತ ನೀರಾವರಿ ಸೌಲಭ್ಯವನ್ನು ಕಲ್ಪಿಸುವ ಮಹತ್ತರ ಯೋಜನೆಯಾದ ಗಂಗಾಕಲ್ಯಾಣ ಯೋಜನೆಯಡಿ ತಲಾ ರೂ. 70,000/- ಕ್ಕೆ ಮೇಲ್ಪಟ್ಟ ವೆಚ್ಚದಲ್ಲಿ ಫಲಾನುಭವಿಗಳಿಗೆ ಉಚಿತ ವಿದ್ಯುತ್ ಸಂಪರ್ಕ ಕಲ್ಪಿಸಲು ಪಂಪ್ಮೋಟಾರ್ ಇತ್ಯಾದಿ ಸಲಕರಣೆಗಳನ್ನು ಕರ್ನಾಟಕ ಸರ್ಕಾರದ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ರಮಾನಾಥ ರೈಯವರು ಡಿ. 5ರಂದು ಮಂಗಳವಾರ ಬಂಟ್ವಾಳ ತಾಲೂಕು ಪಂಚಾಯತ್ ಆವರಣದಲ್ಲಿ ವಿತರಿಸಿದರು.
ಈ ಸಂದರ್ಭದಲ್ಲಿ ಈ ಯೋಜನೆಯ ಪರಿಕರ ಸಾಮಾಗ್ರಿಗಳನ್ನು ಒಂದು ಕಡೆ ಸೇರಿಸಿ ನೇರವಾಗಿ ರೈತರಿಗೆ ನೀಡಿರುವುದು, ಮತ್ತು ರೈತರ ಸಮಸ್ಯೆಗಳನ್ನು ಪರಿಹರಿಸಿರುವುದು ಶ್ಲಾಘನೀಯವಾಗಿದೆ. ಸರ್ಕಾರ ನೀಡಿದ ಸೌಲಭ್ಯವನ್ನು ರೈತರು ಸಮರ್ಪಕವಾಗಿ ಕೃಷಿಗೆ ಬಳಸಿ ಆರ್ಥಿಕವಾಗಿ ಸ್ವಾವಲಂಬಿಯಾಗಬೇಕೆಂದು ಸಚಿವರು ಹೇಳಿದರು.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾನ್ಯ ಎಂ.ಎ. ಗಫೂರ್ರವರು ನಿಗಮದ ಯೋಜನೆಯ ಮಾಹಿತಿ ನೀಡಿ ಹಾಗೂ ಹೊಸ ಯೋಜನೆಯ ಸದುಪಯೋಗ ಪಡೆಯಲು ಜನರಿಗೆ ಕರೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರ, ಬಂಟ್ವಾಳ ನಗರ ಬೂಡಾ ಅಭಿವೃದ್ಧಿ ಅಧ್ಯಕ್ಷರಾದ ಸದಾಶಿವ ಬಂಗೇರ, ಬಂಟ್ವಾಳ ತಾಲೂಕು ಎ.ಪಿ.ಎಂ.ಸಿ. ಅಧ್ಯಕ್ಷರಾದ ಪದ್ಮನಾಭ ರೈ, ಈ ಸಂದರ್ಭದಲ್ಲಿ ಹಾಜರಿದ್ದರು. ದ.ಕ. ಜಿಲ್ಲಾ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಶ್ರೀ ಶ್ರೀಧರ ಭಂಡಾರಿಯವರು ಕಾರ್ಯಕ್ರಮದ ಕೊನೆಯಲ್ಲಿ ಧನ್ಯವಾದವಿತ್ತರು.

