ಬಂಟ್ವಾಳ: ತಾಲೂಕಿನ ಸಿದ್ಧಕಟ್ಟೆ ಗುಣಶ್ರೀ ವಿದ್ಯಾಲಯದಲ್ಲಿ ಏರ್ಪಡಿಸಿದ್ದ ಶಾಲಾ ವಾರ್ಷಿಕೋತ್ಸವ ಹಾಗೂ ನೂತನ ಪದವಿ ಪೂರ್ವ ಕಾಲೇಜು ಉದ್ಘಾಟನಾ ಕಾರ್ಯಕ್ರಮಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮೂಡುಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಶುಕ್ರವಾರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ಬಾಲ್ಯದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ದೇಶದ ಸಂಸ್ಕಾರ ಮತ್ತು ರಾಷ್ಟ್ರಭಕ್ತಿ ಬಗ್ಗೆ ಪ್ರೇರಣೆ ದೊರೆತಾಗ ಮುಂದಿನ ಭವಿಷ್ಯದಲ್ಲಿ ಸೌಹಾರ್ದತೆ ಮತ್ತು ರಾಷ್ಟ್ರಭಕ್ತರ ಸಮಾಜ ನಿರ್ಮಾಣಗೊಳಿಸಲು ಸಾಧ್ಯವಿದೆ ಎಂದು ಅಭಿಪ್ರಾಯಪಟ್ಟರು.
ಮೂಡುಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಮಾತನಾಡಿ, ಈ ಭಾಗದ ಗ್ರಾಮೀಣ ಪ್ರದೇಶದಲ್ಲಿ 800ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಗೂ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ. ಸರ್ಕಾರಿ ಶಾಲೆಗಿಂತ ಗರಿಷ್ಠ ಸೌಲಭ್ಯ ಒದಗಿಸುತ್ತಿರುವ ಈ ಖಾಸಗಿ ಶಿಕ್ಷಣ ಸಂಸ್ಥೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಬಿ.ಸಿ.ರೋಡ್ ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಅಧ್ಯಕ್ಷ ಹಾಗೂ ಉಪ ಪ್ರಾಂಶುಪಾಲ ಪ್ರೊ.ಕೆ.ತುಕಾರಾಮ ಪೂಜಾರಿ ಮಾತನಾಡಿ, ಯುವಜನತೆ ವಿದ್ಯಾವಂತರಾಗಿ ತನ್ನ ಹೆತ್ತವರು ಮತ್ತು ಗುರು ಹಿರಿಯರ ಬಗ್ಗೆ ವಿಶೇಷ ಗೌರವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಈ ವೇಳೆ ಚಕ್ರ ಎಸೆತ ಮತ್ತು ಗುಂಡೆಸೆತ ವಿಭಾಗದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡ ಇಲ್ಲಿನ ವಿದ್ಯಾರ್ಥಿನಿ ರಮ್ಯಶ್ರೀ ಜೈನ್ ಮಾಲ್ದಾಡು ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳ ಸನ್ಮಾನ, ಶಾಲಾ ವಾಹನ ಚಾಲಕರಿಗೆ ಅಭಿನಂದನೆ, ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಬಳಿಕ ಮುಖ್ಯಶಿಕ್ಷಕಿ ಸಬಿತಾ ಲವಿನಾ ಪಿಂಟೋ ವಾರ್ಷಿಕ ವರದಿ ವಾಚಿಸಿದರು.
ಕಾರ್ಯಕ್ರಮದಲ್ಲಿ ಮನ್ದೇವ್ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷ, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್, ಪ್ರಾಂಶುಪಾಲ ಸಂತೋಷ್, ಮಂಗಳೂರು ಮಿಫ್ಟ್ ಕಾಲೇಜು ಪ್ರಾಂಶುಪಾಲೆ ಚಂದ್ರಲೇಖ ಗೌಡ, ಶಾಲಾ ಸಂಚಾಲಕ ರಮೇಶ.ಕೆ., ರಾಧಾಕೃಷ್ಣ ಆಳ್ವ ಅಡ್ಯಾರು, ಮನೋಹರ ಮಂಗಳೂರು, ಮುಖ್ಯಶಿಕ್ಷಕಿ ಕವಿತಾ ಅಡ್ಯಾರು, ವಿದ್ಯಾರ್ಥಿ ನಾಯಕ ಕೀರ್ತನ್ ಆರ್.ಶೆಟ್ಟಿ ಮತ್ತಿತರರಿದ್ದರು. ಸಂಚಾಲಕ ವಿಜಯ ಕುಮಾರ್ ಚೌಟ ವಂದಿಸಿದರೆ, ಶಿಕ್ಷಕ ರಘುನಾಥ್ ಕಾರ್ಯಕ್ರಮ ನಿರೂಪಿಸಿದರು.
