ಮಂಗಳೂರು: ದ.ಕ ಜೆಲ್ಲೆಯಲ್ಲಿ ನಡೆಯುವ ಕೋಮುಗಲಭೆಗೆ ಮೂಲ ಕಾರಣರಾಗುತ್ತಿದ್ದಾರೆ ಎಂಬ ಆರೋಪದ ಮೇರೆಗೆ ಇಬ್ಬರನ್ನು ಆರು ತಿಂಗಳ ಕಾಲ ಜಿಲ್ಲೆಯಿಂದ ಗಡಿಪಾರು ಮಾಡಲು ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಆದೇಶ ಶುಕ್ರವಾರ ಹೊರಡಿಸಿದ್ದಾರೆ.
ಇಲ್ಲಿನ ಬಂಟ್ವಾಳ ತಾಲೂಕಿನ ಕಲ್ಲಡ್ಕ ಪಟ್ಟಣದ ನಿವಾಸಿಗಳಾದ ರತ್ನಾಕರ ಶೆಟ್ಟಿ ಹಾಗೂ ಖಲೀಲ್ ಗಡಿಪಾರಿಗೆ ಒಳಗಾದವರು ಎಂದು ಗುರುತಿಸಲಾಗಿದೆ.
ಶನಿವಾರ ಈ ಬಗ್ಗೆ ಪ್ರತಿಕ್ರಿಯಿಸಿರುವ ದ.ಕ ಎಸ್ಪಿ ಸಿ.ಎಚ್.ಸುಧೀರ್ ಕುಮಾರ್ ರೆಡ್ಡಿ, ಈ ಇಬ್ಬರೂ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ರೌಡಿ ಪಟ್ಟಿಯಲ್ಲಿದ್ದು, ಜೂನ್ ತಿಂಗಳಲ್ಲಿ ಪರಸ್ಪರ ಹಲ್ಲೆ ಮಾಡಿ ಮತೀಯ ಗಲಭೆಗೆ ಕಾರಣರಾಗಿದ್ದರು. ಇವರ ಗಡಿಪಾರಿಗೆ ಮನವಿ ಕೋರಿ ಡಿಸಿಗೆ ಎರಡು ತಿಂಗಳ ಹಿಂದೆ ಅರ್ಜಿ ಸಲ್ಲಿಸಲಾಗಿತ್ತು. ಅದರಂತೆ ಜಿಲ್ಲಾಧಿಕಾರಿಯವರು ವಿಚಾರಣೆ ನಡೆಸಿ ಆದೇಶ ಹೊರಡಿಸಿದ್ದು, ಈ ಆದೇಶದ ಮೇರಗೆ ಇಬ್ಬರನ್ನೂ ಜಿಲ್ಲೆಯಿಂದ ಗಡಿಪಾರು ಮಾಡಲಾಗುವುದು ಎಂದು ತಿಳಿಸಿದ್ದಾರೆ.
