ಹೊಸದಿಲ್ಲಿ: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ‘ಪದ್ಮಾವತ್’ ಚಿತ್ರ ಬಿಡುಗಡೆಗೆ ನಾಲ್ಕು ರಾಜ್ಯಗಳಲ್ಲಿ ಹೇರಿದ್ದ ನಿಷೇಧವನ್ನು ಸುಪ್ರಿಂಕೋರ್ಟ್ ಗುರುವಾರ ತೆರವುಗೊಳಿಸಿದೆ.
ನಾಲ್ಕು ರಾಜ್ಯಗಳಲ್ಲಿ ‘ಪದ್ಮಾವತ್’ ಚಿತ್ರ ಪ್ರದರ್ಶನಕ್ಕೆ ನಿಷೇಧ ಹೇರಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ಡಿ.ವೈ.ಚಂದ್ರಚೂಡ್ ಅವರಿದ್ದ ಪೀಠ ಗೈಗೆತ್ತಿ, ಗುಜರಾತ್, ರಾಜಸ್ಥಾನ್, ಹರಿಯಾಣ, ಮಧ್ಯಪ್ರದೇಶ ರಾಜ್ಯಗಳಲ್ಲಿ ಚಿತ್ರ ಪ್ರದರ್ಶನಕ್ಕೆ ತಡೆಯುಂಟಾಗದಂತೆ ರಾಜ್ಯ ಸರ್ಕಾರಗಳು ನೋಡಿಕೊಳ್ಳಬೇಕು. ಚಿತ್ರ ಮಂದಿರಗಳಿಗೆ ಹಾಗೂ ಸಾರ್ವಜನಿಕರಿಗೆ ರಕ್ಷಣೆ ಒದಗಿಸಬೇಕು ಎಂದು ಆದೇಶ ನೀಡಿದ್ದಾರೆ.
ಅಂತಿಮವಾಗಿ ಪೀಠ ನಾಲ್ಕು ರಾಜ್ಯಗಳ ನಿಷೇಧ ವಿಧಿಸಿ ಹೊರಡಿಸಿದ್ದ ಆದೇಶಕ್ಕೆ ತಡೆ ನೀಡಿ ಮುಂದಿನ ವಿಚಾರಣೆಯನ್ನು ಮಾರ್ಚ್ 26ಕ್ಕೆ ಮುಂದೂಡಿತು.

