ಧಾರವಾಡ: ಶಾಂತಿ, ಸೌಹಾರ್ದತೆಗೆ ಪ್ರತೀಕವಾಗಿದ್ದ ಧಾರವಾಡ ಜಿಲ್ಲೆಯಲ್ಲಿ ದುಷ್ಕರ್ಮಿಗಳ ಅಟ್ಟಹಾಸದಿಂದ ಇಲ್ಲಿನ ಜನ ಸಾಮಾನ್ಯರ ಸಾವು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದೇನೆ ಎಂದು ಮಾನವ ಹಕ್ಕುಗಳ ಹೋರಾಟಗಾರ್ತಿ ಇಸಾಬೆಲ್ಲಾ ಝೇವಿಯರ್ ತಿಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪರಮಾನಂದ ಕೆಂಬಾವಿ, ಕುಮಾರ್ ಪಿಳ್ಳೆ ಹಾಗೂ ಮಹೇಶ ಬ್ಯಾಹಟ್ಟಿ ಕೊಲೆ ಪ್ರಕರಣದ ಬಗ್ಗೆ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಏಕೆ ಮವನವಹಿಸಿದ್ದಾರೆ. ಅಲ್ಲದೆ, ಕೊಲೆ, ರಕ್ತಪಾತ ಕುರಿತು ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮುಖಂಡರು ಏಕೆ ಮಾತನಾಡುತ್ತಿಲ್ಲ ಪ್ರಶ್ನಿಸಿದರು.
ರಾಜ್ಯ ಸರ್ಕಾರ ಹಾಗೂ ಅವಳಿ ನಗರದ ಪೊಲೀಸ್ ಇಲಾಖೆ ಮೇಲೆ ನಂಬಿಕೆ ಕಳೆದು ಕೊಂಡಿರುವ ನನಗೆ ರಾಜ್ಯ ಮಾನವ ಹಕ್ಕುಗಳ ಆಯೋಗದ ಮೇಲೆ ನನಗೆ ವಿಶ್ವಾಸವಿಲ್ಲ. ಇದಕ್ಕಾಗಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಈ ಸಂಬಂಧ ದೂರು ನೀಡಿದ್ದೇನೆ ಎಂದ ಅವರು, ಜಿಲ್ಲೆಯಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಇದಕ್ಕೆ ರಾಜ್ಯ ಸರ್ಕಾರವೇ ಹೊಣೆ ಎಂದು ಆರೋಪಿಸಿದರು.

