ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆ ನಡೆದಿರುವುದಕ್ಕೆ ಸರ್ಕಾರದ ಕಾರಣ ಎಂದು ಆರೋಪಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕರೆ ನಿಡಿದೆ.
ಜೆ.ಸಿ. ನಗರದಲ್ಲಿ ಸಂತೋಷ್ ಹತ್ಯೆ ವಿಷಯ ತಿಳಿಯುತ್ತಿದ್ದಂತೆ ಬಿಜೆಪಿ ಹಾಗೂ ಆರೆಸ್ಸೆಸ್ ಕಾರ್ಯಕರ್ತರು ಬುಧವಾರ ರಾತ್ರಿಯಿಂದಲೇ ಜೆ.ಸಿ. ನಗರ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಗುರುವಾರ ಬೆಳಗ್ಗೆ ಸಂತೋಷ್ ಮನೆ ಮುಂದೆ ಧರಣಿ ಮುಂದುವರೆಸಿದ್ದರು.
ಸಂತೋಷ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ, ಮೃತನ ಪತ್ನಿಗೆ ಸರ್ಕಾರಿ ಕೆಲಸ ಮತ್ತು ಗಾಂಜಾ ದಂಧೆಗೆ ಕಡಿವಾಣ ಹಾಕಬೇಕು. ಅಲ್ಲಿಯವರೆಗೂ ಶವ ಸಂಸ್ಕಾರಕ್ಕೆ ಅವಕಾಶ ಕೊಡುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸ್ ಕಮಿಷನರ್ ಸುನೀಲ್ ಕುಮಾರ್, ಮತ್ತು ಗೃಹ ಸಚಿವ ರಾಮಲಿಂಗಾ ರೆಡ್ಡಿ ಜತೆ ಮೊಬೈಲ್ ನಲ್ಲಿ ಚರ್ಚೆ ನಡೆಸಿ ಭರವಸೆ ನೀಡಿದ ನಂತರ ಶವ ಸಂಸ್ಕಾರ ನರವೇರಿಸಲಾಯಿತು.

