ಮಂಗಳೂರು: ಕಲ್ಲಡ್ಕ ಶ್ರೀ ರಾಮ ಶಾಲೆಗೆ ಅನುದಾನ ನಿಲ್ಲಿಸಿರುವ ರಾಜ್ಯ ಸರ್ಕಾರ ಬೆಂಗಳೂರಿನ ಅರೇಬಿಕ್ ಕಾಲೇಜಿನ ಅವರಣದಲ್ಲಿರುವ ಧಾರ್ಮಿಕ ಗುರು ಆಶ್ರಫ್ ಸ್ಮಾರಕ ಭವನ ನಿರ್ಮಾಣಕ್ಕೆ ಮತ್ತು ಜಾಮಿಯ ಉಲ್ ಉಲಾಮ ಗ್ರೂಪ್ ಶಾಲಾ ಕಟ್ಟಡ ನಿರ್ಮಾಣಕ್ಕೆ 20 ಕೋಟಿ ಘೋಷಣೆ ಮಾಡಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕಲ್ಲಡ ಶ್ರೀ ರಾಮ ಶಾಲೆಯ ಮಕ್ಕಳ ಊಟಕ್ಕೆ ಬರುತ್ತಿದ್ದ ಅನುದಾನ ತಡೆಹಿಡಿದ ಸಿಎಂ ಸಿದ್ದರಾಮಯ್ಯ ಸರ್ಕಾರ ಚುನಾವಣೆಗಾಗಿ ಅರೇಬಿಕ್ ಶಾಲೆಗಳಿಗೆ ಕೋಟಿ ಕೋಟಿ ಅನುದಾನ ಬಿಡುಗಡೆ ಮಾಡಿ ಅಲ್ಪಸಂಖ್ಯಾತರ ಒಲೈಕೆಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ಲಿಂಗಾಯಿತ, ವೀರಶೈವ ಸಮುದಾಯದ ನಡುವೆ ಬಿರುಕು ಮೂಡಿಸುತ್ತಿದ್ದು, ಬಹುಸಂಖ್ಯಾತರನ್ನು ಕಡೆಗಣಿಸಿ ಅಲ್ಪಸಂಖ್ಯಾತರನ್ನು ಒಲೈಸುತ್ತದೆ. ಇವೆಲ್ಲವೂ ಕಾಂಗ್ರೆಸ್ ಕೆಟ್ಟ ದೋರಣೆಯನ್ನು ತಿಳಿಸುತ್ತದೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ಸರಕಾರ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಈ ಎಲ್ಲಾ ಕಾರಣಗಳಿಂದ ಮುಖ್ಯಮಂತ್ರಿ, ಹಾಗೂ ಗೃಹ ಸಚಿವರು ರಾಜೀನಾಮೆ ಸಲ್ಲಿಸುವುದು ಸೂಕ್ತ ಎಂದು ಹೇಳಿದರು.

