ಸುಳ್ಯ: ರಾಜ್ಯದಲ್ಲಿ ಹಿಂದುತ್ವ ವಿರೋಧಿಗಳನ್ನು ಸೋಲಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ನಮ್ಮ ಉದ್ದೇಶ ಎಂದು ಹಿಂದೂ ಸಂಘಟನೆ ಮುಖಂಡ ಮಹೇಶ್ ಕುಮಾರ್ ರೈ ಮೇನಾಲ ತಿಳಿಸಿದ್ದಾರೆ.
ತಾಲೂಕಿನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತ ಬಂದಿದ್ದು, ಹಿಂದೂ ಸಂಘಟನೆಗಳ ದಮನಕ್ಕೆ ಮುಂದಾಗಿದೆ. ಅಲ್ಲದೆ, ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಆರೋಪ ಹೊರೆಸಿ ಪ್ರಕರಣ ದಾಖಲಿಸುತ್ತದೆ ಎಂದು ಆರೋಪಿಸಿದರು.
ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ನಮ್ಮ ಎಲ್ಲಾ ಸಂಘಟನೆಗಳು ನೇರವಾಗಿ ಬಿಜೆಪಿಯ ಜತೆ ಗುರುತಿಸಿಕೊಂಡು ಪ್ರಚಾರಕ್ಕೆ ಇಳಿಯುತ್ತೇವೆ. ನಮ್ಮ ಸಂಘಟನೆಯ ವಾರ್ಡ್ ಸದಸ್ಯರ ಮೂಲಕ ಬಿಜೆಪಿಯನ್ನು ಗೆಲ್ಲಿಸುವ ನಿರ್ಧಾರ ಮಾಡಿದ್ದೇವೆ ಎಂದು ಹೇಳಿದರು.
ಲತೀಶ್ ಗುಂಡ್ಯ ಮಾತನಾಡಿ, ಕೈರಂಗಳ ಗೋಶಾಲೆಯಿಂದ ಗೋವುಗಳನ್ನು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮರಣಾಂತ ಉಪವಾಸ ಕೈಗೊಂಡಿರುವ ಟಿ.ಜಿ. ರಾಜಾರಾಂ ಭಟ್ ಅವರಿಗೆ ವಿಶ್ವಹಿಂದೂ ಪರಿಷತ್ ಸಂಪೂರ್ಣ ಬೆಂಬಲ ನೀಡಲಿದೆ. ಇಂತಹ ಘಟನೆಗಳಿಗೆ ಪೊಲೀಸ್ಇಲಾಖೆಯ ವೈಫಲ್ಯವೇ ಕಾರಣ ಎಂದು ದೂರಿದರು.
ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ ಅಧ್ಯಕ್ಷ ಗಣಪತಿ ಭಟ್ ಮಜಿಗುಂಡಿ, ಮುಖಂಡರಾದ ಅಜಿತ್ ಪೇರಾಲು, ಪ್ರಕಾಶ್ ಯಾದವ್, ನವೀನ್ ಉಪಸ್ಥಿತರಿದ್ದರು.

