ಮಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ಗೆ ಇನ್ನಷ್ಟು ಬಲ ತುಂಬಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಗುರುವಾರದಿಂದ ಮತ್ತೆ ತಮ್ಮ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.
ಗುರುವಾರ ಉತ್ತರ ಕನ್ನಡ ಭಾಗದಲ್ಲಿ ಅಬ್ಬರದ ಪ್ರಚಾರ ನಡೆಸಿರುವ ರಾಹುಲ್ ಗಾಂಧಿ, ಇಂದು ಬೆಳಗ್ಗೆ ಮುರುಡೇಶ್ವರದಿಂದ ಮಂಗಳೂರಿಗೆ ಹೆಲಿಕಾಫ್ಟರ್ ಮೂಲಕ ಆಗಮಿಸಿ ಬಳಿಕ ನಗರದ ಟಿಎಂಪೈ ಹಾಲ್ ನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದ್ದಾರೆ.
ಬಳಿಕ ರಾಹುಲ್ ಗಾಂಧಿ ಮಧ್ಯಾಹ್ನ ವೇಳೆ ಬಂಟ್ವಾಳಕ್ಕೆ ತೆರಳಲಿದ್ದು, ಅಲ್ಲಿನ ಪ್ರಮುಖ ಬೀದಿಗಳಲ್ಲಿ ರೋಡ್ ಶೋ ನಡೆಸಿ ಕಾಂಗ್ರೆಸ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಂಟ್ವಾಳದಿಂದ ಧರ್ಮಸ್ಥಳಕ್ಕೆ ತೆರಳಿರುವ ಅವರು, ಮಂಜುನಾಥೇಶ್ವರನ ದರ್ಶನ ಪಡೆಯಲಿದ್ದಾರೆ. ಇದೇ ಸಂದರ್ಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಕುಟುಂಬದ ಜತೆ ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಆ ಬಳಿಕ ರಾಹುಲ್ ಗಾಂಧಿ ಕರಾವಳಿ ಪ್ರವಾಸ ಮುಗಿಸಿ ಮಡಿಕೇರಿ ಕಡೆಗೆ ಪ್ರವಾಸ ಬೆಳೆಸಲಿದ್ದಾರೆ.

