ಬೆಳ್ತಂಗಡಿ: ಈ ಹಿಂದೆ 2013ರ ಚುನಾವಣೆ ವೇಳೆ ಬೆಳ್ತಂಗಡಿಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ರಂಜನ್ ಜಿ. ಗೌಡ ಬಿಜೆಪಿ ತೊರೆಯಲು ಮುಂದಾಗಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಈ ಬಾರಿ ಬೆಳ್ತಂಗಡಿ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲು ಪಕ್ಷದ ಹೈಕಮಾಂಡ್ ಯುವ ಮೋರ್ಚಾ ಮುಖಂಡ ನ್ಯಾಯವಾದಿ ಹರೀಶ್ ಪೂಂಜಾ ಅವರಿಗೆ ಟಿಕೆಟ್ ನೀಡಿದೆ. ಇದರಿಂದ ಪಕ್ಷದ ನಡೆಗೆ ಅಸಮಾಧಾನಗೊಂಡಿರುವ ರಂಜನ್ ಜಿ. ಗೌಡ ಮತ್ತು ಅವರ ತಂದೆ, ಮಾಜಿ ಸಚಿವ ಗಂಗಾಧರ ಗೌಡ ಪಕ್ಷ ತೊರೆಯಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದ ಹಿನ್ನೆಲೆ ಕಳೆದ ಕೆಲವು ದಿನಗಳಿಂದ ಮೌನವಾಗಿದ್ದ ರಂಜನ್ ಗೌಡ ಪಕ್ಷ ಬದಲಿಸಿ ಕಾಂಗ್ರೆಸ್ ಪಕ್ಷ ಸೇರಲು ನಿರ್ಧರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಡಿ.ಕೆ. ಶಿವಕುಮಾರ್ ಜೊತೆ ಮಾತುಕತೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಡಿಕೆಶಿ ಸಾರಥ್ಯದಲ್ಲಿ ರಂಜನ್ ಗೌಡ ಮತ್ತು ಗಂಗಾಧರ ಗೌಡ ಕಾಂಗ್ರೆಸ್ ಸೇರಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

