ಪುತ್ತೂರು: ಹಿಂದೂ ಸಮಾಜವನ್ನು ಮತ್ತು ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಹತ್ಯೆ ಮತ್ತು ಹಲ್ಲೆನಡೆಸುತ್ತಿದ್ದು, ಇದು ಕಾಂಗ್ರೆಸ್ ಪ್ರಾಯೋಜಿತ ಗೂಂಡಾಗಿರಿಯಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.
ವಿಟ್ಲ ಮಂಗಿಲಪದವು, ಕುಡ್ತಮುಗೇರು ಪರಿಸರದಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಆದರ್ಶ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುವನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಹಲ್ಲೆ ಮತ್ತು ಆಕ್ರಮಣವನ್ನು ನಾವು ಸಹಿಸುವುದಿಲ್ಲ. ದ್ವೇಷದ ರಾಜಕಾರಣಕ್ಕೆ ಉತ್ತರ ಕೊಡಲು ನಾವೇನು ಬಲೆ ತೊಟ್ಟಿಲ್ಲ. ಹಲ್ಲೆ ಆಕ್ರಮಣ ಮಾಡುವ ಹಿಂದೆ ಇರುವ ಸೋತ ಅಭ್ಯರ್ಥಿಗಳು ಮಾನಸಿಕವಾಗಿ ಕುಂದಿ ಇಂತಹ ಘಟನೆಗಳಿಗೆ ಪ್ರೇರಣೆ ಕೊಡುತ್ತಿದ್ದಾರೆ ಎಂಬುದು ನನಗೆ ತಿಳಿದಿದೆ ಎಂದು ದೂರಿದರು.
ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ನಾವು ಎಲ್ಲಾ ಶಾಸಕರ ಮೂಲಕ ದೊಡ್ಡವಾದ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಕೆಎಫ್ಡಿ ಮತ್ತು ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸಿದ ಪರಿಣಾಮ ಹಿಂದೂಗಳ ಮೇಲೆ ಹಲ್ಲೆ ಮಾಡಿದೆ. ಕಾಂಗ್ರೆಸ್ನ ಶಾಸಕರು ಹತಾಶರಾಗಿ ಬಹುಶಃ ಮುಂದಿನ ದಿನ ಹೇಗಾದರೂ ಮಾಡಿ ಲೋಕಸಭಾ ಚುನಾವಣೆಯನ್ನು ಗೆಲ್ಲಬೇಕೆಂಬ ನಿಟ್ಟಿನಲ್ಲಿ ಇವತ್ತು ಈ ರೀತಿಯ ಹಿಂದೂಗಳ ಮೇಲೆ ಹಲ್ಲೆ ಮಾಡಿ ಒಂದಷ್ಟು ಭಯ ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ರಾಮ್ದಾಸ್ ಹಾರಾಡಿ, ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಉಪಸ್ಥಿತರಿದ್ದರು.

